Monday, April 1, 2013

ನಾಗರಾಜನಲ್ಲಿ ಎಷ್ಟೊಂದು ಅಮೃತ


 ಪರಿಸರ ಸಂರಕ್ಷಣೆಗಾಗಿ ಕೆಲವರು ಮಕ್ಕಳಲ್ಲಿ ಅರಿವು ಮೂಡಿಸುವ ಕಾರ್ಯದಲ್ಲಿ ತೊಡಗಿದ್ದರೆ, ಕೆಲವರು ಗಿಡಮರಗಳನ್ನು ನೆಟ್ಟು ಪರಿಸರಕ್ಕೆ ತಮ್ಮ ಕಾಣಿಕೆ ಸಲ್ಲಿಸುತ್ತಿರುತ್ತಾರೆ. ಸಾಂಘಿಕ ಪ್ರಯತ್ನ ಕೆಲವರದ್ದಾದರೆ, ಏಕಾಂಗಿ ಹೋರಾಟ ಕೆಲವರದ್ದು. ಆದರೆ ಗ್ರಾಮೀಣ ಭಾಗದಲ್ಲಿದ್ದುಕೊಂಡು ತಮ್ಮ ಚಟುವಟಿಕೆಯಿಂದ ತಮಗೇ ಅರಿವಿಲ್ಲದೆ ಪರಿಸರ ಸಂರಕ್ಷಣೆಯಲ್ಲಿ ಭಾಗಿಯಾಗಿರುವವರೂ ಕೆಲವರಿದ್ದಾರೆ. ಅವರ ಸಾಲಿನಲ್ಲಿ ಸೇರುವವರು ಶಿಡ್ಲಘಟ್ಟ ತಾಲ್ಲೂಕಿನ ಕೊತ್ತನೂರಿನ ಸ್ನೇಕ್ ನಾಗರಾಜ್.

 
ಭರಧ್ವಾಜ ಹಕ್ಕಿಯನ್ನು ರಕ್ಷಿಸಿರುವ ಶಿಡ್ಲಘಟ್ಟ ತಾಲ್ಲೂಕಿನ ಕೊತ್ತನೂರಿನ ಸ್ನೇಕ್ ನಾಗರಾಜ್. 

 ಯಾವುದೇ ರೀತಿಯ ಹಾವಾದರೂ ಸಲೀಸಾಗಿ ಹಿಡಿದು ರಕ್ಷಿಸಿ ಸುರಕ್ಷಿತ ಸ್ಥಾನಕ್ಕೆ ಬಿಡುವ ಇವರು ಹಾವನ್ನಷ್ಟೇ ಅಲ್ಲದೆ ಹಲವಾರು ಹಕ್ಕಿಗಳು ಹಾಗೂ ವಿವಿಧ ಜೀವಜಂತುಗಳನ್ನೂ ರಕ್ಷಿಸಿದ್ದಾರೆ. ದ್ರಾಕ್ಷಿ ತೋಟಗಳಲ್ಲಿ ಹಕ್ಕಿಗಳಿಂದ ಬೆಳೆಯನ್ನು ರಕ್ಷಿಸಲು ತೆಳ್ಳನೆಯ ಬೇಲಿಯನ್ನು ಕಟ್ಟಿರುತ್ತಾರೆ. ಆ ಬೇಲಿಗೆ ಸಿಕ್ಕಿ ನರಳುವ ಬಾವಲಿ, ಮಿಂಚುಳ್ಳಿ,  ಗೂಬೆ, ಅಳಿಲು, ಕಾಗೆ, ಭರಧ್ವಾಜ, ಗಿಳಿ, ಕೋಗಿಲೆ, ಕೆಂಬೂತ ಮುಂತಾದ ಹಲವಾರು ಹಕ್ಕಿಗಳನ್ನು ರಕ್ಷಿಸಿದ್ದಾರೆ.

ನಾಗರಹಾವನ್ನು ರಕ್ಷಿಸುತ್ತಿರುವುದು.

  ’ಹಾಲಿನ ಡೈರಿಯಲ್ಲಿ ಕೆಲಸ ಮಾಡುವುದರಿಂದ ಬೆಳಿಗ್ಗೆ ಬೇಗ ಎದ್ದು ಹೊರಡುತ್ತೇನೆ. ದ್ರಾಕ್ಷಿ ತೋಟಗಳ ಬೇಲಿಗುಂಟ ನಡೆದು ಹೋಗುವಾಗ ಯಾವುದಾದರೂ ಹಕ್ಕಿ ಅಥವಾ ಬಾವಲಿ ತೋಟದ ಬಲೆಗೆ ಸಿಕ್ಕಿದ್ದು ಕಂಡು ಬಂದಲ್ಲಿ ಬಿಡಿಸಿ ನೀರು ಕುಡಿಸಿ ಸುರಕ್ಷಿತ ಸ್ಥಳದಲ್ಲಿ ಬಿಡುತ್ತೇನೆ. ನನ್ನ ಚಟುವಟಿಕೆಗಳನ್ನು ಕಂಡಿರುವ ನಮ್ಮ ಗ್ರಾಮದವರು ಏನಾದರೂ ಜಂತುಗಳನ್ನು ಕಂಡರೆ ನನಗೆ ತಿಳಿಸುತ್ತಾರೆ. ಕೆಲವು ಬಾರಿ ಅವುಗಳ ಜೀವ ಉಳಿಸಲು ಅಸಾಧ್ಯವಾದಾಗ ತುಂಬ ಬೇಸರವಾಗುತ್ತದೆ.
  ನಮ್ಮಲ್ಲಿ ಹಾವನ್ನು ವಿಷಜಂತು ಎಂದು ಪರಿಗಣಿಸಿರುದರಿಂದ ಎಲ್ಲಾದರೂ ಹಾವು ಕಂಡಲ್ಲಿ ದೂರವಾಣಿ ಮೂಲಕ ತಿಳಿಸುತ್ತಾರೆ. ನಾನು ಹಿಡಿದು ರಕ್ಷಿಸುತ್ತೇನೆ. ಸುರಕ್ಷಿತ ಸ್ಥಳಕ್ಕೆ ಬಿಟ್ಟುಬರುತ್ತೇನೆ. ಹಾಗೆಯೇ ಯಾವುದೇ ಹಕ್ಕಿ, ಚೇಳು ಮುಂತಾದ ಯಾವುದೇ ಜೀವಿಗೆ ತೊಂದರೆಯಾಗಿರುವುದು ಕಂಡರೂ ರಕ್ಷಿಸಲು ಪ್ರಯತ್ನಿಸುತ್ತೇನೆ. ಅವೂ ನಮ್ಮಂತೆಯೇ. ಆದರೆ ಮಾತು ಬರದಷ್ಟೇ. ಎಲ್ಲಾ ಪ್ರಾಣಿಗಳಿಗೂ ಬದುಕಲು ನಮ್ಮಷ್ಟೇ ಹಕ್ಕಿದೆ. ಸುತ್ತ ಮುತ್ತ ಯಾವುದೇ ಜೀವಿಗೆ ತೊಂದರೆಯಾದರೂ ಸಾಧ್ಯವಾದಷ್ಟೂ ಸಹಾಯ ಮಾಡುವುದು ನನ್ನ ಹವ್ಯಾಸವಾಗಿಬಿಟ್ಟಿದೆ’ ಎನ್ನುತ್ತಾರೆ ಕೊತ್ತನೂರಿನ ಸ್ನೇಕ್ ನಾಗರಾಜ್. 

ವಿಷಪೂರಿತ ಮಂಡಲಹಾವನ್ನು ಹಿಡಿದಿರುವುದು.
ಕೊತ್ತನೂರಿನ ಸ್ನೇಕ್ ನಾಗರಾಜ್ ಫೋನ್ ನಂ. ೯೩೪೨೫೧೫೪೪೩

No comments: