Friday, April 13, 2012

ಶಿಡ್ಲಘಟ್ಟದಲ್ಲಿ "ಗಾಣ" ಗ್ರಾಮ


ಶಿಡ್ಲಘಟ್ಟ ತಾಲ್ಲೂಕಿನ ಶೆಟ್ಟಹಳ್ಳಿ ಗ್ರಾಮದಲ್ಲಿ ಗಾಣದಿಂದ ಎಣ್ಣೆ ತಯಾರಿಸುತ್ತಿರುವುದು.


ಆಧುನಿಕ ತಂತ್ರಜ್ಞಾನದಿಂದಾಗಿ ಹಲವಾರು ಪರಂಪರಾಗತ ಉದ್ದಿಮೆಗಳು ಕಣ್ಮರೆಯಾಗುತ್ತಿವೆ. ಅವುಗಳಲ್ಲಿ ಎಣ್ಣೆ ಗಾಣಗಳೂ ಒಂದು. ಹಿಂದೆ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಹಲವಾರು ಗ್ರಾಮಗಳಲ್ಲಿದ್ದ ಗಾಣಗಳು ಈಗ ಕೇವಲ ಪಳೆಯುಳಿಕೆಗಳಾಗಿ ಉಳಿದಿವೆ. ಸಂಪ್ರದಾಯಿಕ ಎಣ್ಣೆ ಗಾಣಗಳು ಎಣ್ಣೆ ಕಾರ್ಖಾನೆಯೊಂದಿಗೆ ಯಾವ ತರಹದ ಪೈಪೋಟಿಗಳನ್ನು ನಡೆಸಲಸಾಧ್ಯವಾಗಿವೆ. ಆದರೆ ಶಿಡ್ಲಘಟ್ಟ ತಾಲ್ಲೂಕಿನ ಶೆಟ್ಟಹಳ್ಳಿಯಲ್ಲಿ ಇನ್ನೂ ಹಳೆಯ ಗಾಣವನ್ನೇ ನಂಬಿ ಜೀವನ ನಡೆಸುತ್ತಿರುವುದು ವಿಶೇಷ. ಎಲ್ಲಾ ಗಾಣಗಳೂ ನಿಂತುಹೋಗಿದ್ದರೂ ಶೆಟ್ಟಹಳ್ಳಿ ನಾರಾಯಣಪ್ಪ ಅವರು ಮಾತ್ರ ಪರಂಪರೆಯ ಪಳೆಯುಳಿಕೆಯಾಗಿ ಮುಂದುವರೆಸಿದ್ದಾರೆ.
ಒಂದು ವಸ್ತುವನ್ನು ಹಿಂಡಿ, ಅದಕ್ಕೆ ದ್ರವರೂಪ ನೀಡುವುದು ಗಾಣದ ಮೂಲ ಉದ್ದೇಶ. ಮೂಲತಃ ಕೊಬ್ಬರಿ, ಕಡಲೆ, ಹರಳು, ಹೊನ್ನೆ, ಎಳ್ಳು, ಔಡಲ, ಕುಸುಬಿ ಮುಂತಾದ ಎಣ್ಣೆ ಹಿಂಡುವ ಸಾಧನವಾಗಿದ್ದ ಗಾಣ, ನಂತರದ ದಿನಗಳಲ್ಲಿ ಕಬ್ಬನ್ನು ಅರೆಯುವ ಸಾಧನವಾಗಿ ರೂಪುಗೊಂಡು ಆಲೆಮನೆ ಎಂಬ ಹೆಸರು ಪಡೆಯಿತು.

ಗಾಣದ ವಿನ್ಯಾಸವು ಮೊದಲು ಸುಮಾರು ೯ ರಿಂದ ೧೦ ಅಡಿ ವ್ಯಾಸದ ಚಪ್ಪಟೆಯಾದ ಗಟ್ಟಿ ನೆಲ ನಿರ್ಮಿಸುವುದರೊಂದಿಗೆ ಪ್ರಾರಂಭವಾಗುತ್ತದೆ. ಇಲಿ ತೈಲ ಬೀಜಗಳನ್ನು ಹಾಕಲು ದೊಡ್ಡ ಒರಳನ್ನು ಇಡಲಾಗುತ್ತದೆ. ಅದಕ್ಕೆ ಗಾಣದ ಮರವನ್ನು ಕಟ್ಟುತ್ತಾರೆ. ಕಬ್ಬಿಣದ ಬಳೆಯ ಅಂಚನ್ನುಳ್ಳ ಮರದ ಒನಕೆಯನ್ನು ಗಾಣದ ಒರಳಿನ ಸೂಕ್ತವಾದ ಆಯಕಟ್ಟಿನ ಸ್ಥಳದಲ್ಲಿ ಸ್ಥಾಪಿಸಿರುತ್ತಾರೆ. ಗಾಣದ ಮರ ಹಾಗೂ ಒರಳಿನ ಕೆಳಭಾಗಕ್ಕೂ ಹೊಂದಿಕೊಂಡಿರುವಂತೆ ಕತ್ತರಿ ಹಲಗೆಯೊಂದನ್ನು ನಿರ್ಮಿಸಿ ಆ ಹಲಗೆಯ ಮೇಲೆ ಭಾರವಾದ ಕಲ್ಲುಗಳನ್ನು ಹೇರಿರುತ್ತಾರೆ.
ಕತ್ತರಿ ಹಲಗೆಯು ತನ್ನೊಂದು ಹಗ್ಗದಿಂದ ಗಾಣದ ಮಧ್ಯಭಾಗವನ್ನು ಆವರಿಸಿಕೊಂಡು ಭದ್ರವಾಗಿರುತ್ತದೆ. ನಂತರ ಒನಕೆಗೆ ಹೊಂದಿಕೊಂಡು ಆಸರೆಯಾಗಿರುವಂತೆಯೂ ಬೀಜಗಳನ್ನು ಅರೆಯುವ ಪ್ರಧಾನ ಕ್ರಿಯೆಯು ಸುಸೂತ್ರವಾಗುವಂತೆ ಮಲ್ಲಗಂಬವೊಂದನ್ನು ಸ್ವಲ್ಪ ಓರೆಯಾಗಿ ನಿಲ್ಲಿಸಲಾಗುತ್ತದೆ. ಹೀಗೆ ಸ್ಥಾನ ಗ್ರಹಣ ಮಾಡಿದ ಈ ಮಲ್ಲಗಂಬವು ಮಧ್ಯದಲ್ಲಿ ಬಲವಾದ ಹಗ್ಗದ ಜೋಡಣೆಯನ್ನು ಹೊಂದಿರುತ್ತದೆ. ಈ ಎಲ್ಲಾ ಸಿದ್ಧತೆಗಳನ್ನು ಒಳಗೊಂಡು ರಚನೆಯಾದ ಎಣ್ಣೆಗಾಣದ ಕ್ರಿಯೆಯಿಂದ ಕೊಬ್ಬರಿ, ಔಡಲ, ಶೇಂಗಾ ಮುಂತಾದ ತೈಲ ಬೀಜಗಳ ಎಣ್ಣೆ ಉತ್ಪಾದನೆಯಾಗುತ್ತದೆ. ಇಂಥಾ ಪ್ರತಿಭಾಪೂರ್ಣವಾದ ಗಾಣದ ಕರಕುಶಲ ಕಲೆಯು ಬಡಿಗನ ಕುಶಾಗ್ರಮತಿಯನ್ನು ಪ್ರತಿನಿಧಿಸುತ್ತದೆ. ನೋಡಲು ಲಿಂಗದ ಆಕಾರದ ಈ ಗಾಣ ತುಂಬಾ ಕಲಾತ್ಮಕತೆಯಿಂದ ಕೂಡಿದುದಾಗಿದೆ.


ಎಣ್ಣೆ ಕಾಳುಗಳನ್ನು ಬೆಳಗಿನ ಅವಧಿಯಲ್ಲಿ ಗಾಣಕ್ಕೆ ಹಾಕಿ ಪುಡಿ ಮಾಡಿ ಜರಡಿ ಹಿಡಿಯುತ್ತಿರುವುದು.


‘ನಮ್ಮ ಗಾಣದ ಕಲ್ಲು ಎಷ್ಟು ಹಳೆಯದೋ ತಿಳಿಯದು. ನಾನು ಹುಟ್ಟುವ ಮೊದಲಿಂದಲೂ ಇತ್ತು. ವರ್ಷದ ಬಿಸಿಲಿರುವ ಮೂರ್ನಾಕು ತಿಂಗಳಿನಲ್ಲಿ ಮಾತ್ರ ಈ ಕಸುಬು ಚೆನ್ನಾಗಿ ನಡೆಯುತ್ತದೆ. ಮೊದಲು ನಮ್ಮ ಹಳ್ಳಿಯಲ್ಲಿ ಎಂಟು ಗಾಣಗಳಿದ್ದವು. ಈಗ ಎಲ್ಲರೂ ನಿಲ್ಲಿಸಿಬಿಟ್ಟಿದ್ದಾರೆ. ಅವರಲ್ಲಿ ಕೆಲವರು ಯಂತ್ರಗಳಿಂದ ತಯಾರಿಸಿದ ಎಣ್ಣೆಯನ್ನು ಮಾರುವುದನ್ನು ಕಸುಬನ್ನಾಗಿಸಿಕೊಂಡಿದ್ದಾರೆ. ಮೊದಲಾದರೆ ಅರಳು, ಕಡಲೆ, ಇಪ್ಪೆ, ಎಳ್ಳು, ಕೊಬ್ಬರಿ ಮೊದಲಾದವುಗಳಿಂದ ಎಣ್ಣೆ ತೆಗೆಯುತ್ತಿದ್ದೆವು. ಆದರೆ ಈಗ ಹೆಚ್ಚಾಗಿ ಹೊಂಗೆಯನ್ನೇ ನಂಬಿದ್ದೇವೆ’ ಎನ್ನುತ್ತಾರೆ ಹಿರಿಯರಾದ ನಾರಾಯಣಪ್ಪ.

‘ಒಣಗಿದ ಎಣ್ಣೆ ಕಾಳುಗಳನ್ನು ಬೆಳಗಿನ ಅವಧಿಯಲ್ಲಿ ಗಾಣಕ್ಕೆ ಹಾಕಿ ಪುಡಿ ಮಾಡಿ ಜರಡಿ ಹಿಡಿಯುತ್ತೇವೆ. ನಂತರ ಪುಡಿಗೆ ಸ್ವಲ್ಪ ನೀರು ಹಾಕಿ ಹದವಾಗಿ ಉಂಡೆ ಮಾಡಿಟ್ಟು ಅವನ್ನು ಸಂಜೆ ವೇಳೆಗೆ ಗಾಣಕ್ಕೆ ಹಾಕಿ ಎಣ್ಣೆ ತೆಗೆಯುತ್ತೇವೆ. ೫೦ ಕೆಜಿ ಬೀಜದಿಂದ ೧೦ ಕೆಜಿ ಎಣ್ಣೆ ತಯಾರಾಗುತ್ತದೆ ಮತ್ತು ೩೦ ಕೆಜಿ ಹಿಂಡಿ ಸಿಗುತ್ತದೆ. ಹಿಂಡಿ ತೋಟಗಳಿಗೆ ಒಳ್ಳೆಯ ಗೊಬ್ಬರ. ಒಂದು ಕೆಜಿ ಎಣ್ಣೆ ೬೫ ರಿಂದ ೭೦ ರೂಗೆ ಮಾರಾಟವಾದರೆ, ಹಿಂಡಿ ಒಂದು ಕೆಜಿಯನ್ನು ೧೬ ರೂಗಳಂತೆ ಮಾರುತ್ತೇವೆ. ಹೊಂಗೆ ಬೀಜವನ್ನು ನಾವು ರೈತರಿಂದ ಒಂದು ಸೇರಿಗೆ ೨೦೦ ಗ್ರಾಂ ಎಣ್ಣೆ ನೀಡಿ ಪಡೆಯುತ್ತೇವೆ. ಅದರಿಂದ ಸಿಗುವ ಚಕ್ಕೆ ಅಥವಾ ಹಿಂಡಿಯೇ ನಮಗೆ ಲಾಭ. ಯಂತ್ರದಿಂದ ತಯಾರಾದ ಎಣ್ಣೆಗಿಂತ ಗಾಣದಲ್ಲಿ ತೆಗೆಯುವ ಎಣ್ಣೆ ಗುಣಮಟ್ಟದಲ್ಲಿ ಚೆನ್ನಾಗಿರುತ್ತದೆಂದು ಕೆಲವರು ನಮ್ಮಲ್ಲೇ ಕೊಳ್ಳುತ್ತಾರೆ. ಗಾಣಕ್ಕೆ ಕೆಲಸವಿರದ ಸಮಯದಲ್ಲಿ ನಾವು ವ್ಯವಸಾಯ ಮತ್ತು ಪಶುಪಾಲನೆಯಲ್ಲಿ ತೊಡಗುತ್ತೇವೆ’ ಎಂದು ಅವರು ಹೇಳಿದರು.


ಗಾಣದಿಂದ ಹೊರಬರುತ್ತಿರುವ ಎಣ್ಣೆ.


‘ಗುಂಡು ತೋಪುಗಳು ಕರಗುತ್ತಿವೆ. ಅವುಗಳ್ಲಲಿ ಬೆಳೆಯುತ್ತಿದ್ದ ಹೊಂಗೆ ಇಪ್ಪೆ, ಬೇವು ಮೊದಲಾದ ಮರಗಳಿಂದ ಸಿಗುತ್ತಿದ್ದ ಎಣ್ಣೆ ಬೀಜಗಳ ಲಭ್ಯತೆ ಕಡಿಮೆಯಾಗುತ್ತಿದೆ. ಅಕಸ್ಮಾತ್ ಎಣ್ಣೆ ಬೀಜಗಳು ಸಿಕ್ಕರೂ ಕೊಂಡು ಶೇಖರಿಸುವಷ್ಟು ಹಣ ಗಾಣದವರ ಬಳಿ ಇರುವುದಿಲ್ಲ. ಹೀಗಾಗಿ ಗಾಣಗಳು ಸ್ಥಗಿತಗೊಂಡು, ದುಡಿಯುವ ಸಂಪತ್ತು ವ್ಯರ್ಥವಾಗಿದೆ. ಸರ್ಕಾರ ಎಣ್ಣೆ ಬೀಜಗಳನ್ನು ಒದಗಿಸುವುದರಿಂದ ಈ ಪಾರಂಪರಿಕ ವೃತ್ತಿಯ ಅವಸಾನವನ್ನು ತಡೆಯಲು ಪ್ರಯತ್ನಿಸಬೇಕು’ ಎಂದು ಗ್ರಾಮದ ಹಿರಿಯರೊಬ್ಬರು ತಿಳಿಸಿದರು.


ತಯಾರಾದ ಎಣ್ಣೆಯನ್ನು ಡಬ್ಬಿಗೆ ಸುರಿಯುತ್ತಿರುವುದು.


ಕರ್ನಾಟಕದಲ್ಲಿ ಎಣ್ಣೆ ತೆಗೆಯುವ ಸಮುದಾಯವನ್ನು ಗಾಣಿಗ ಎನ್ನುತ್ತಾರೆ. ಕೇರಳದಲ್ಲಿ ಗಾಣಿಗರನ್ನು ಗಾನಿಕರೆಂದು ಕರೆಯುವರು. ಗಾಣಿಗರಲ್ಲಿ ಎಣ್ಣೆ ತೆಗೆಯುವ ರೀತಿ, ಎತ್ತಿನ ಜೋಡುಗಳ ಸಂಖ್ಯೆ, ಎಣ್ಣೆ ತೆಗೆಯಲು ಉಪಯೋಗಿಸುವ ಚೌಕಟ್ಟು ಮತ್ತು ಭಾಷೆಗಳ ಆಧಾರದ ಮೇಲೆ ಉಪಪಂಗಡಗಳಿವೆ. ಕಿರುಗಾಣಿಗ, ಹೆಗ್ಗಾಣಿಗ, ಜ್ಯೋತಿಘನ, ಪಂಚಮಸಾಲಿ ಗಾಣಿಗ, ಸಜ್ಜನ, ತೆಲೀ, ವನಿಯನ್, ಗಾಂಡ್ಲಾ, ಕರಿಗಾಣಿಗ, ಬಿಳಿಗಾಣಿಗ ಮತ್ತು ತುಳುಗಾಣಿಗರೆಂಬ ಪಂಗಡಗಳಿವೆ.

ಇಪ್ಪತ್ತನೇ ಶತಮಾನದ ಆರಂಭದಲ್ಲಿ ನಮ್ಮ ದೇಶದಲ್ಲಿ ಸುಮಾರು ಐದು ಲಕ್ಷ ಗಾಣಗಳು ಹನ್ನೆರಡು ವಿಧದ ಎಣ್ಣೆ ತಯಾರಿಕೆಯಲ್ಲಿ ತೊಡಗಿದ್ದವು. ಕ್ರಿ.ಪೂ.೧೫೦೦ ರಲ್ಲಿಯೇ ಗಾಣವಿತ್ತಿಂದು ಋಗ್ವೇದದಿಂದ ತಿಳಿದುಬರುತ್ತದೆ. ಯಂತ್ರಗಳು ಬರುವ ಮುನ್ನ ಸುಮಾರು ೨೫೦೦ ವರ್ಷಗಳ ಕಾಲ ದೇಶದ ಎಣ್ಣೆಯ ಅಗತ್ಯತೆಯನ್ನು ಪೂರೈಸಿದ್ದಾವೆ ಗಾಣಗಳು ಎಂದು ತಮ್ಮ ‘ಘಾನಿ - ದ ಟ್ರಡಿಷನಲ್ ಆಯಿಲ್‌ಮಿಲ್ ಆಫ್ ಇಂಡಿಯಾ’ ಎಂಬ ಪುಸ್ತಕದಲ್ಲಿ ಬರೆದಿದ್ದಾರೆ ಕೆ.ಟಿ.ಅಚ್ಚಯ್ಯ.

1 comment:

sunaath said...

ಆಶ್ಚರ್ಯ ಹಾಗು ಸಂತೋಷ ಆಗುತ್ತಿವೆ.